ಬಳ್ಳಾರಿ : ಗರ್ಭಿಣಿಯರ ಹೆರಿಗೆಗೆ ಪೂರ್ವ 3 ದಿನಗಳ ಮೊದಲು ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ನಿಗಾವಣೆ ಅಡಿ ಸರಳ ಹೆರಿಗೆಗೆ ಆದ್ಯತೆ ನೀಡಲಾಗಿದ್ದು, ಇದು ವಿನೂತನ ಅಭಿಯಾನಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಗಂಡಾಂತರ ಗರ್ಭಿಣಿಯರ ದಾಖಲಾತಿಗಾಗಿ 5 ಹಾಸಿಗೆಗಳನ್ನು ಕಾಯ್ದಿರಿಸಿ ದಾಖಲಾದ ಗರ್ಭಿಣಿಯರಿಗೆ ಆರೋಗ್ಯ ವಿಚಾರಿಸಿ ಅವರು ಮಾತನಾಡಿದರು.
ಗರ್ಭಿಣಿಯರಿಗೆ ತನ್ನ ಕುಟುಂಬಕ್ಕೆ ಹೊಸ ಜೀವ ಸೆಲೆ ನೀಡುವ ಹೆರಿಗೆಗೆ ಯಾವುದೇ ಅಪಾಯಗಳು ಇದ್ದರೆ ತಕ್ಷಣವೇ ಗುರ್ತಿಸಿ ನಿರಂತರ ಕಾಳಜಿ ಮೂಲಕ ಎಲ್ಲಾ ಅಗತ್ಯ ಪರೀಕ್ಷೆ ಕೈಗೊಂಡು ಆರೈಕೆ ಮಾಡಿ, ಸರಳ ಹೆರಿಗೆಗೆ ಆದ್ಯತೆ ನೀಡಿ ಜೊತೆಗೆ ಉಚಿತ ಪೌಷ್ಟಿಕ ಆಹಾರ ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಗಂಡಾಂತರ ಗರ್ಭಿಣಿಯರ ಹೆರಿಗೆಯು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚು ಹಣ ಪಾವತಿಸಿ ಕುಟುಂಬಗಳು ಆರ್ಥಿಕವಾಗಿ ತೊಂದರೆಗೀಡಾಗುವ ಪ್ರಕರಣಗಳನ್ನು ತೊಡೆದು ಹಾಕಲು ಜಿಲ್ಲಾಡಳಿತದ ಬೆಂಬಲದಡಿ ಈ ಸೌಲಭ್ಯ ಜಿಲ್ಲೆಯ ಸಾರ್ವಜನಿಕರಿಗೆ ಕಡುಬಡವರಿಗೆ ಆಶಾದೀಪವಾಗಿದೆ ಎಂದರು.
ಚೊಚ್ಚಲು ಗರ್ಭಿಣಿ, ಎತ್ತರ ಕಡಿಮೆ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕಬ್ಬಿಣಾಂಶ ಕೊರತೆ, ಅವಳಿ ಜವಳಿ ಗರ್ಭಣಿ, ವಿವಾಹವಾಗಿ ಐದಕ್ಕಿಂತ ಹೆಚ್ಚು ವರ್ಷಗಳ ನಂತರ ಗರ್ಭಿಣಿಯಾಗಿರುವುದು, ಮೊದಲ ಹೆರಿಗೆ ಸಿಸೇರಿಯನ್, ಮುಂತಾದ ಕಾರಣಗಳಿದ್ದರೆ ಆಯಾ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕ ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ನಿಗಾವಹಿಸುವ ಮೂಲಕ ಹೆರಿಗೆ ಅವಧಿಯಲ್ಲಿ ಕಂಡು ಬರಬಹುದಾದ ಸಂಭವನಿಯ ತೊಂದರೆಗಳನ್ನು ವೈದ್ಯರ ನಿಗಾವಣೆ ಮೂಲಕ ಗುರ್ತಿಸಿ ಸುರಕ್ಷಿತ ಹೆರಿಗೆ ಕೈಗೊಳ್ಳಲು ಸಾಧ್ಯವಾಗಲಿದೆ ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಮಾತನಾಡಿ ತೀವ್ರ ರಕ್ತಹೀನತೆಯಂತಹ ಸನ್ನಿವೇಶದಲ್ಲಿ ಕ್ಷೇತ್ರ ಮಟ್ಟದಲ್ಲಿ ಸ್ಥಳೀಯವಾಗಿ ನೀಡುವ ಚಿಕಿತ್ಸೆಯಾದ (ಐಎಫ್ಎ ಮಾತ್ರೆ, ಐರನ್ ಸುಕ್ರೋಸ್, ರಕ್ತ ಹಾಕಿಸುವಿಕೆ ) ಸುಧಾರಣೆಯಾಗದಿದ್ದಲ್ಲಿ ತಜ್ಞರ ಬಳಿ ತಪ್ಪದೇ ಕಳುಹಿಸಬೇಕು. ಅಗತ್ಯವಿದ್ದಲ್ಲಿ ಸ್ಕ್ಯಾನ್ ಮಾಡಿಸುವುದು. ಮೊದಲ ಹೆರಿಗೆ ಶಸ್ತ್ರಚಿಕಿತ್ಸೆ ಮೂಲಕವಾದಲ್ಲಿ ಪುನಃ ಗರ್ಭಿಣಿಯಾಗುವ ಅವಧಿಯನ್ನು ಕನಿಷ್ಟ 3 ವರ್ಷಕ್ಕೆ ಕಡ್ಡಾಯವಾಗಿ ಮುಂದೂಡಬೇಕು. ಅಲ್ಲದೇ ಗಾಳಿ ಸುದ್ದಿ ಮೂಲಕ ಕಬ್ಬಿಣಾಂಶ ಮಾತ್ರೆ ನುಂಗಿದರೆ, ಭ್ರೂಣ ದಪ್ಪವಾಗುತ್ತದೆ, ಕಪ್ಪು ಬಣ್ಣದ ಮಗು ಹುಟ್ಟುತ್ತದೆ ಎಂಬ ತಪ್ಪು ನಂಬಿಕೆ ನಂಬಬಾರದು ಎಂದರು.
ವೈದ್ಯರ ಸಲಹೆಯಂತೆ ಉಚಿತವಾಗಿ ನೀಡುವ ಕಬ್ಬಿಣಾಂಶ ಮಾತ್ರೆಗಳನ್ನು ಪ್ರತಿದಿನ ಒಂದರಂತೆ ಕನಿಷ್ಟ 180 ಒಂದು ವೇಳೆ ರಕ್ತಹೀನತೆಯ ಪ್ರಮಾಣ ತೀವ್ರವಾಗಿದ್ದಲ್ಲಿ ದಿನಕ್ಕೆ 2 ರಂತೆ 360 ಮಾತ್ರೆಗಳನ್ನು 6 ತಿಂಗಳ ಅವಧಿಯಲ್ಲಿ ಸೇವಿಸಬೇಕು. ಇದರ ಜೊತೆ ದೈಹಿಕವಾಗಿ ಸದೃಡವಾಗಿರಲು ಕ್ಯಾಲ್ಸಿಯಮ್ ಮಾತ್ರೆಗಳನ್ನು ಸಹ ನುಂಗಬೇಕು ಎಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಡಿ.ಎಮ್.ಒ ಹಾಗೂ ಬಳ್ಳಾರಿ ತಾಲ್ಲೂಕ ಆರೋಗ್ಯ ಅಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ.ವೀರೇಂದ್ರ ಕುಮಾರ್, ಪ್ರಸೂತಿ ತಜ್ಞರಾದ ಡಾ.ಜಯಪ್ರದ, ಡಾ.ಅಶ್ರಫ್ ಡಾ.ಶ್ರೀ ಲಕ್ಷ್ಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಶುಶ್ರೂಷಣಾ ಮೇಲ್ವಿಚಾರಕಿ ವಿಮಲಾಕ್ಷಿ, ಶುಶ್ರೂಷಣಾಧಿಕಾರಿ ಮಾಲತಿ ಉಡುಪಿ ಸೇರಿದಂತೆ ಸಿಬ್ಬಂದಿಯವರು, ತಾಯಂದಿರು ಹಾಜರಿದ್ದರು.
No comments:
Post a Comment